Tuesday, October 20, 2015

ರಾಜ್ಯದಲ್ಲಿ ಪ್ಲಾಸ್ಟಿಕ್ ನಿಷೇಧಕ್ಕೆ ಸಂಪುಟ ಸಮ್ಮತಿ

ಬೆಂಗಳೂರು: ರಾಜ್ಯದಲ್ಲಿ ಪ್ಲಾಸ್ಟಿಕ್ ತಯಾರಿಕೆ, ಮಾರಾಟ ಮತ್ತು  ಬಳಕೆ ನಿಷೇಧಕ್ಕೆ ರಾಜ್ಯ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಚಿವ ಸಂಪುಟದಲ್ಲಿ ಸಭೆಯಲ್ಲಿ 40 ಮೈಕ್ರಾನ್‍ಗಿಂತಲೂ ಕಡಿಮೆ ಪ್ರಮಾಣದ ಎಲ್ಲಾ ರೀತಿಯ ಪ್ಲಾಸ್ಟಿಕ್ ಉತ್ಪನ್ನಗಳ ತಯಾರಿಕೆ, ಸರಬರಾಜು, ಸಂಗ್ರಹಣೆ, ಸಾಗಾಣಿಕೆ, ಮಾರಾಟ, ವಿತರಣೆ ಹಾಗೂ ಬಳಕೆಯನ್ನು ರಾಜ್ಯಾದ್ಯಂತ ಸಂಪೂರ್ಣ ನಿಷೇಧಿಸಲು ತೀರ್ಮಾನಿಸಲಾಯಿತು ಎಂದು ಪಶುಸಂಗೋಪನಾ ಮತ್ತು ಮುಜರಾಯಿ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಶ್ರೀ ಟಿ. ಬಿ. ಜಯಚಂದ್ರ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.
   ಪ್ಲಾಸ್ಟಿಕ್ ಹಾನಿಕರ. ಅದರ ಬಳಕೆಯಿಂದ ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮದ ಹಿನ್ನೆಲೆಯಲ್ಲಿ ಈ ನಿಷೇಧವನ್ನು ವಿಧಿಸಲಾಗಿದೆ. ರಾಜ್ಯದಲ್ಲಿ 450 ಪ್ಲಾಸ್ಟಿಕ್ ಉತ್ಪಾದನಾ ಕಂಪನಿಗಳಿವೆ. ಈ ಕಂಪನಿಗಳು 40 ಮೈಕ್ರಾನ್‍ಗಿಂತಲೂ ಹೆಚ್ಚು ಪ್ರಮಾಣದ ಪ್ಲಾಸ್ಟಿಕ್ ಉತ್ಪಾದನೆ ಮಾಡಿ ರಫ್ತು ಮಾಡಬಹುದಾಗಿದೆ. ಆದ್ದರಿಂದ, ಸರ್ಕಾರದ ಈ ನಿರ್ಧಾರದಿಂದ ಪ್ಲಾಸ್ಟಿಕ್ ತಯಾರಿಕಾ ಕಂಪನಿಗಳಿಗೆ ಯಾವುದೇ ನಷ್ಟ ಉಂಟಾಗುವುದಿಲ್ಲ. ಜೊತೆಗೆ, ಇಂತಹ ಪ್ಲಾಸ್ಟಿಕ್‍ನಿಂದ ಕೃಷಿ ಕೊಳವೆಗಳು (ಪೈಪುಗಳು) ಮತ್ತು ಸಿಂಪಡಣಾ ಉಪಕರಣಗಳು (ಸ್ಪ್ರಿಂಕ್ಲರ್ ಎಕ್ವಿಪ್‍ಮೆಂಟ್ಸ್) ತಯಾರಿಸಬಹುದಲ್ಲದೆ, ಡಾಂಬರು ರಸ್ತೆಗಳನ್ನು ನಿರ್ಮಿಸಬಹುದು ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

No comments:

Post a Comment